ಚಿಕ್ಕಮಗಳೂರು ಜಿಲ್ಲೆ ಮಲೆನಾಡಿನಾದ್ಯಂತ ಕಳೆದ ನಾಲ್ಕೈದು ದಿನದಿಂದ ಧಾರಾಕಾರ ಮಳೆ ಸುರಿಯುತ್ತಿದ್ದ ಮಳೆ ಶನಿವಾರ ಸಂಜೆಯಿಂದ ಬಿಡುವು ಕೊಡದೇ ಸುರಿಯಲಾರಂಭಿಸಿದ ಗಾಳಿ ಮಳೆಯಿಂದ ಹಲವೆಡೆ ಹಾನಿ ಸಂಭವಿಸಿದೆ.
ಶನಿವಾರ ರಾತ್ರಿ ಸುರಿದ ಗಾಳಿ ಮಳೆಯಿಂದ ಮೂಡಿಗೆರೆ ತಾಲೂಕಿನ ಬೆಟ್ಟಗೆರೆ ಗ್ರಾ.ಪಂ. ವ್ಯಾಪ್ತಿಯ ಕೋಳೂರು ಗ್ರಾಮದ ಜಾನಕಿ ಎಂಬುವರ ಮನೆ ಮೇಲೆ ಮರವೊಂದು ಬಿದಿದ್ದು, ಇದರಿಂದ ಮನೆ ಸಂಪೂರ್ಣ ಜಖಂಗೊಂಡಿದ್ದು, ರಾತ್ರಿ 9 ಗಂಟೆಯಲ್ಲಿ ಮರವೊಂದು ದಿಢೀರ್ ಎಂಬಂತೆ ಮನೆ ಮೇಲೆ ಬಿದ್ದಿದೆ. ಇದರಿಂದ ಮನೆ ಸಂಪೂರ್ಣ ಜಖಂಗೊಂಡಿದ್ದು, ಗೋಡೆಯ ಇಟ್ಟಿಗೆ ಜಾನಕಿ ತಲೆಯ ಮೇಲೆ ಬಿದ್ದು, ಸಣ್ಣ ಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮೂಡಿಗೆರೆ ಗೌಡಹಳ್ಳಿ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ಶನಿವಾರ ರಾತ್ರಿ ರಸ್ತೆಗೆ ಅಡ್ಡಲಾಗಿ ಬಿದಿದ್ದು, ವಿದ್ಯುತ್ ಕಂಬ ಹಾಗೂ ತಂತಿಗಳು ತುಂಡಾಗಿವೆ. ಇದರಿಂದ ಭಾನುವಾರ ಬೆಳಗ್ಗೆ ವರೆಗೆ ರಸ್ತೆ ಸಂಚಾರಕ್ಕೆ ಅಡಚಣೆಯಾಗಿದ್ದು, ಮೆಸ್ಕಾಂ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮರ ತೆರವುಗೊಳಿಸಿ, ವಿದ್ಯುತ್ ತಂತಿ ದುರಸ್ತಿ ಕಾರ್ಯ ಕೈಗೊಂಡರು. ಬಿಡದೇ ಸುರಿಯಲಾರಂಭಿಸಿದ ಮಳೆಯಿಂದ ಜನ ಜೀವನ ಅಸ್ತವ್ಯಸ್ತಗೊಂಡಿದ್ದು ಕೃಷಿ ಚಟುವಟಿಕೆಗಳು ಚುರುಕುಗೊಂಡಿದೆ.
ಜಿಲ್ಲೆಯ ಮೂಡಿಗೆರೆ, ಕಳಸ, ಶೃಂಗೇರಿ, ಎನ್.ಆರ್.ಪುರ, ಕೊಪ್ಪ, ಚಿಕ್ಕಮಗಳೂರು ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು, ನದಿ ತೊರೆಗಳು ಉಕ್ಕಿ ಹರಿಯುತ್ತಿವೆ. ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಿದೆ. ಇನ್ನೂ ಮೂರ್ನಾಲ್ಕು ದಿನ ಮಳೆ ಮುಂದುವರಿಯುವ ಮೂನ್ಸೂಚನೆ ಇದೆ.



