ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯಶಸ್ವಿಯಾಗಿ ನಡೆಯುತ್ತಿದ್ದು, ಯಾವುದೇ ಅರ್ಹ ಮತದಾರ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು. ಒಂದು ವೇಳೆ ಯಾರಿಗಾದರೂ ಗಣತಿ ನಮೂನೆ ಲಭ್ಯವಾಗದಿದ್ದಲ್ಲಿ ತಕ್ಷಣವೇ ಸಹಾಯವಾಣಿ ಸಂಖ್ಯೆ 1950ಗೆ ಕರೆ ಮಾಡಿ ಮಾಹಿತಿ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಭಂವರ್ ಸಿಂಗ್ ಮೀನಾ ಅವರು ಮನವಿ ಮಾಡಿದರು.
ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಶನಿವಾರ ನಗರದ ತಾಲ್ಲೂಕು ಕಚೇರಿಯಿಂದ ಕರ್ತಿಕೆರೆ ಗ್ರಾಮ ಪಂಚಾಯಿತಿವರೆಗೆ ಹಮ್ಮಿಕೊಳ್ಳಲಾಗಿದ್ದ ಎಸ್ಐಆರ್ ಜಾಗೃತಿಗಾಗಿ `ಬೈಕ್ ಜಾಥಾ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಕಳೆದ 18 ದಿನಗಳ ಹಿಂದೆ ಎಸ್ಐಆರ್ ಪ್ರಕ್ರಿಯೆ ಪ್ರಾರಂಭವಾಗಿದೆ. ಜಿಲ್ಲೆಯ ಒಟ್ಟು 9,60,000 ಮತದಾರರ ಪೈಕಿ ಈಗಾಗಲೇ ಬಹುತೇಕ ಎಲ್ಲರಿಗೂ ಗಣತಿ ನಮೂನೆಗಳನ್ನು ತಲುಪಿಸಲಾಗಿದೆ. ಕೇವಲ 11,000 ಗಣತಿ ನಮೂನೆಗಳು ಮಾತ್ರ ವಿತರಣೆಯಾಗದೆ ಬಾಕಿ ಉಳಿದಿವೆ. ವಿಳಾಸದಲ್ಲಿ ಮತದಾರರು ಸಿಗದ ಕಾರಣ ಈ ಗಣತಿ ನಮೂನೆಗಳು ವಿತರಣೆಯಾಗಿಲ್ಲ. ಗಣತಿ ನಮೂನೆ ಸಿಗದವರು ಆತಂಕಪಡುವ ಅಗತ್ಯವಿಲ್ಲ. ಅರ್ಹ ಮತದಾರರು ತಕ್ಷಣವೇ ರಾಷ್ಟ್ರೀಯ ಮತದಾರರ ಸಹಾಯವಾಣಿ 1950ಗೆ ಕರೆ ಮಾಡಬಹುದು ಅಥವಾ ಸ್ಥಳೀಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮ ಆಡಳಿತ ಅಧಿಕಾರಿ, ಬಿಎಲ್ಒ ಅಥವಾ ತಹಸೀಲ್ದಾರ್ ಅವರನ್ನು ಸಂಪರ್ಕಿಸಿ ಮಾಹಿತಿ ನೀಡಿದರೆ, ಅಧಿಕಾರಿಗಳೇ ನಿಮ್ಮ ಮನೆ ಬಾಗಿಲಿಗೆ ಬಂದು ಗಣತಿ ನಮೂನೆ ವಿತರಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ.ಹನುಮಂತಪ್ಪ ಮಾತನಾಡಿ, ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಸಿಕ್ಕಿರುವ ಅತ್ಯಂತ ಮೌಲ್ಯಯುತವಾದ ಮತದಾನದ ಹಕ್ಕಿನಿಂದ ಯಾರೂ ಕೂಡ ವಂಚಿತರಾಗಬಾರದು. ಈ ನಿಟ್ಟಿನಲ್ಲಿ ಬಿಎಲ್ಒಗಳು ಜನರ ಮನೆ ಬಾಗಿಲಿಗೇ ಬರಲಿದ್ದಾರೆ. ಸಾರ್ವಜನಿಕರು ತಮ್ಮಲ್ಲಿ ಯಾವುದೇ ಗೊಂದಲ ಅಥವಾ ಅನುಮಾನಗಳಿದ್ದರೆ ಅವರ ಬಳಿ ಕೇಳಿ ಪರಿಹರಿಸಿಕೊಳ್ಳಬೇಕು. ಸಾರ್ವಜನಿಕರು ತಮ್ಮ ಬಳಿ ಇರಬೇಕಾದ ದಾಖಲೆಗಳನ್ನು ಬಿಎಲ್ಒಗಳಿಗೆ ನೀಡಿ, ಗಣತಿ ನಮೂನೆಯನ್ನು ಸಂಪೂರ್ಣವಾಗಿ ಭರ್ತಿ ಮಾಡಿ ಅವರಿಗೆ ಮರಳಿ ಸಲ್ಲಿಸಬೇಕು. ಆಗ ಮಾತ್ರವೇ ನಮಗೆ ಆ ಹಕ್ಕು ಸಿಗುತ್ತದೆ. ಇಲ್ಲದಿದ್ದರೆ ನಾವು ಮತದಾನದ ಹಕ್ಕಿನಿಂದ ವಂಚಿತರಾಗುವ ಪರಿಸ್ಥಿತಿ ಎದುರಾಗಬಹುದು ಎಂದು ಎಚ್ಚರಿಸಿದರು.
ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಹೆಚ್.ಎಸ್.ಕೀರ್ತನಾ ಮಾತನಾಡಿ, ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯು ಉತ್ತಮ ಹಂತದಲ್ಲಿದ್ದು, ಪ್ರತಿಯೊಬ್ಬ ಅರ್ಹ ಮತದಾರನ ಹಕ್ಕು ರಕ್ಷಿಸಲ್ಪಡಬೇಕು ಎಂದು ಹೇಳಿದರು.
ನಮ್ಮ ಜಿಲ್ಲೆಯಲ್ಲಿ ಎಸ್ಐಆರ್ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದು, ಉತ್ತಮ ಪ್ರಗತಿ ಕಂಡಿದೆ. ಪ್ರಸ್ತುತ ಹಂತದಲ್ಲಿ ಮನೆ ಮನೆಗೆ ತೆರಳಿ ನೀಡಲಾಗಿರುವ ಗಣತಿ ನಮೂನೆಗಳನ್ನು ಸಂಬಂಧಪಟ್ಟ ಬಿಎಲ್ಒಗಳಿಗೆ ಮರಳಿ ಸಲ್ಲಿಸುವುದು ಅತ್ಯಂತ ಜವಾಬ್ದಾರಿಯುತ ಹಾಗೂ ಪ್ರಮುಖವಾದ ಕೆಲಸವಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವ ಉದ್ದೇಶದಿಂದ ಈ ಬೈಕ್ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದರು.
ನಗರದ ತಾಲ್ಲೂಕು ಕಚೇರಿಯಿಂದ ಆರಂಭಗೊಂಡ ಬೈಕ್ ಜಾಥಾವು ಹನುಮಂತಪ್ಪ ವೃತ್ತ, ಎಂ.ಜಿ. ರಸ್ತೆ ಹಾಗೂ ಕೋಟೆ ಬಡಾವಣೆ ಮೂಲಕ ಹಾದು ಕರ್ತಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯವರೆಗೆ ಸಂಚರಿಸಿ ಸಾರ್ವಜನಿಕರಲ್ಲಿ ಎಸ್ಐಆರ್ ಕುರಿತು ಅರಿವು ಮೂಡಿಸಿತು.
ನಗರಸಭೆ ಪೌರಾಯುಕ್ತ ಬಿ.ಸಿ.ಬಸವರಾಜು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.


