ಪಕ್ಷದ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಬಣಕಲ್ ಹೋಬಳಿ ಕಾಂಗ್ರೆಸ್ ವತಿಯಿಂದ ಬುಧವಾರ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಿತು.
ಸಭೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಬಿ.ಬಿ. ನಿಂಗಯ್ಯ, “ಕಾಂಗ್ರೆಸ್ ಪಕ್ಷದ ನಿಜವಾದ ಶಕ್ತಿ ಕಾರ್ಯಕರ್ತರೇ ಆಗಿದ್ದಾರೆ. ಎಲ್ಲ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಒಗ್ಗಟ್ಟಿನಿಂದ ಪಕ್ಷ ಸಂಘಟನೆಗೆ ಶ್ರಮಿಸಬೇಕು. ಮುಂಬರುವ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ಸಂಘಟಿತವಾಗಿ ಎದುರಿಸಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಪ್ರತಿಯೊಬ್ಬ ಕಾರ್ಯಕರ್ತರು ಶ್ರಮಿಸಬೇಕು. ಸರ್ಕಾರದ ಜನಪರ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ,” ಎಂದು ಹೇಳಿದರು.
ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಮಾತನಾಡಿ, ಬಣಕಲ್ ಹೋಬಳಿಯಲ್ಲಿ ಕಾಂಗ್ರೆಸ್ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದ್ದು, ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಮುಂಬರುವ ಚುನಾವಣೆಗಳಲ್ಲಿ ಉತ್ತಮ ಫಲಿತಾಂಶ ಸಾಧಿಸಬಹುದು ಎಂದು ಹೇಳಿದರು.
ಸಭೆಯಲ್ಲಿ ಬಣಕಲ್ ಹೋಬಳಿಯ ಏಳು ಗ್ರಾಮ ಪಂಚಾಯಿತಿಗಳಿಂದ ಸುಮಾರು 250ಕ್ಕೂ ಹೆಚ್ಚು ಕಾರ್ಯಕರ್ತರು ಹಾಗೂ ಮುಖಂಡರು ಭಾಗವಹಿಸಿದ್ದರು. ಎಸ್ಐಆರ್ ಕುರಿತು ಮಾಹಿತಿ ನೀಡಲಾಯಿತು. ಜೊತೆಗೆ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ಚರ್ಚೆ ನಡೆಸಲಾಯಿತು.
ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ಸ್ಥಾನದಿಂದ ತೆರವುಗೊಳಿಸಿರುವ ಜಯರಾಮ್ ಗೌಡ ಅವರನ್ನು ಮರುನೇಮಕ ಮಾಡಬೇಕು ಹಾಗೂ ಹೋಬಳಿ ಕಾಂಗ್ರೆಸ್ ಅಧ್ಯಕ್ಷರಾಗಿ ಸುಬ್ರಮಣ್ಯ ಅವರನ್ನು ಮುಂದುವರಿಸಬೇಕು ಎಂಬ ಒಮ್ಮತದ ನಿರ್ಣಯವನ್ನು ಸಭೆಯಲ್ಲಿ ಕೈಗೊಳ್ಳಲಾಯಿತು. ಹೋಬಳಿ ಕಾಂಗ್ರೇಸ್ ಅಧ್ಯಕ್ಷ ಸುಬ್ರಮಣ್ಯ ತ್ರಿಪುರ ಅಧ್ಯಕ್ಷತೆ ವಹಿಸಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ಗೌಡ, ಹಿರಿಯ ಮುಖಂಡ ಎಂ.ಪಿ. ಮನುಗೌಡ, ಕೆಂಜಿಗೆ ವಿನಯ್ ಗೌಡ, ಅಲ್ಪಸಂಖ್ಯಾತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇರ್ಫಾನ್, ವಿನಯ್ ಕುಮಾರ್, ಎಂ.ಎಸ್. ಅನಂತ, ಬಿ.ಎ. ಉಮರ್, ಸಿ.ಕೆ. ಇಬ್ರಾಹಿಂ, ಕುಂದೂರು ಸುಂದರೇಶ್ ಗೌಡ, ಹೊಸಳ್ಳಿ ಮಾಧವ್ ಗೌಡ, ಹೊಸಳ್ಳಿ ಚಂದ್ರೇಗೌಡ, ಚಕ್ಮಕ್ಕಿ ಎ.ಸಿ. ಅಯೂಬ್, ತರುವೆ ರಾಮಚಂದ್ರ ಗೌಡ, ಕೊಟ್ಟಿಗೆಹಾರ ಅಜೀಜ್, ದಿಲ್ದಾರ್ ಬೇಗಂ, ಮರುಗುಂದ ಪ್ರಸನ್ನ, ತರುವೆ ಗ್ರಾಮ ಪಂಚಾಯಿತಿ ಅಧ್ಯಕ್ಷ ರಘು ಸೇರಿದಂತೆ ಏಳು ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಸದಸ್ಯರು, ಮಾಜಿ ಅಧ್ಯಕ್ಷರು, ಘಟಕದ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.


