ನನ್ನ ಬೆಳೆ, ನನ್ನ ಹಕ್ಕು ಘೋಷಣೆಯಡಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರೈತರು ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಳೆಗಳ ವಿವರವನ್ನು ಮೊಬೈಲ್ ಮೂಲಕ ಸ್ವತಃ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ. ಆದ್ದರಿಂದ ಎಲ್ಲಾ ರೈತರು ಕೂಡಲೇ ತಮ್ಮ ಬೆಳೆ ವಿವರವನ್ನು ದಾಖಲಿಸಿಕೊಳ್ಳಬೇಕೆಂದು ಉಪ ಕೃಷಿ ನಿರ್ದೇಶಕಿ ಕುಮುದ ಹೇಳಿದರು.
ಅವರು ಇತ್ತೀಚೆಗೆ ಮೂಡಿಗೆರೆ ತಾಲೂಕಿನ ಬಿನ್ನಡಿ ಗ್ರಾಮ ವ್ಯಾಪ್ತಿಯ ರೈತರ ಜಮೀನಿನಲ್ಲಿ ಕೃಷಿ ಇಲಾಖೆಯಿಂದ ರೈತರ ಮೊಬೈಲ್ನಲ್ಲಿ ಬೆಳೆ ವಿವರವನ್ನು ನಮೂದಿಸುವ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಗಾರದಲ್ಲಿ ಮಾತನಾಡಿದರು. ರೈತರ ಜಮೀನಿನಲ್ಲಿ ಬೆಳೆದಿರುವ ಬೆಳೆಗಳ ವಿವರಗಳು ದಾಖಲೆಗಳಲ್ಲಿ ತಪ್ಪಾಗಿ ನಮೂದಾಗಿದ್ದರೆ, ಬೆಳೆ ವಿಮೆ, ಬೆಳೆ ಹಾನಿ ಪರಿಹಾರ, ಬೆಳೆ ಸಾಲ, ಸಹಾಯಧನ ಸೇರಿದಂತೆ ಸರಕಾರದಿಂದ ದೊರೆಯುವ ವಿವಿಧ ಸೌಲಭ್ಯಗಳಿಂದ ರೈತರು ವಂಚಿತರಾಗುವ ಸಾಧ್ಯತೆ ಇರುತ್ತದೆ. ಇದನ್ನು ತಪ್ಪಿಸುವ ಉದ್ದೇಶದಿಂದ ರೈತರೇ ತಮ್ಮ ಮೊಬೈಲ್ ಮೂಲಕ ಬೆಳೆ ವಿವರ ದಾಖಲಿಸುವ ವ್ಯವಸ್ಥೆ ಸರಕಾರ ಜಾರಿಗೆ ತಂದಿದೆ ಎಂದು ಹೇಳಿದರು.
ರೈತರು ತಮ್ಮ ಮೊಬೈಲ್ನಲ್ಲಿ ಮುಂಗಾರು ರೈತರ ಬೆಳೆ ಸಮೀಕ್ಷೆ 2026-27 ಆ್ಯಪ್ ಮೂಲಕ ರೈತರ ಹೆಸರು, ಮೊಬೈಲ್ ಸಂಖ್ಯೆ, ಸರ್ವೇ ನಂಬರ್, ಜಮೀನಿನ ವಿಸ್ತೀರ್ಣ ಹಾಗೂ ಬೆಳೆ ವಿವರಗಳನ್ನು ದಾಖಲಿಸಬೇಕು. ಬಳಿಕ ಬೆಳೆಯ ಛಾಯಾಚಿತ್ರವನ್ನು ಅಪ್ಲೋಡ್ ಮಾಡಬೇಕೆಂದು ಮಾಹಿತಿ ನೀಡಿದರು.
ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿಯಲ್ಲಿ ಭತ್ತದ ಬೆಳೆಗೆ ವಿಮೆ ಮಾಡಿಸಬಹುದು. ವಿಮಾ ಕಂತು ಪಾವತಿಸಲು ಅರ್ಜಿಯೊಂದಿಗೆ ಆಧಾರ್ ಕಾರ್ಡ್, ಪಹಣಿ, ಬ್ಯಾಂಕ್ ಪಾಸ್ ಬುಕ್ ದಾಖಲಾತಿಯನ್ನು ಹತ್ತಿರದ ಬ್ಯಾಂಕ್, ಸಾಮಾನ್ಯ ಸೇವಾ ಕೇಂದ್ರ, ಗ್ರಾಮ್ ಒನ್ ಕೇಂದ್ರದಲ್ಲಿ ನಿಗದಿತ ವಿಮಾ ಕಂತು ಎಕರೆಗೆ ರೂ. 605 ಪಾವತಿಸಿ ಬೆಳೆ ವಿಮೆಗೆ ನೋಂದಣಿ ಮಾಡಿಸಿಕೊಳ್ಳಬಹುದು. ಬೆಳೆ ವಿಮೆ ನೋಂದಣಿಗೆ ಆಗಸ್ಟ್ 14 ಕೊನೆ ದಿನವಾಗಿದೆ ಎಂದು ಹೇಳಿದರು.
ಸಹಾಯಕ ಕೃಷಿ ನಿರ್ದೇಶಕಿ ಸುಮ, ಕೃಷಿ ಅಧಿಕಾರಿ ವೆಂಕಟೇಶ್ ಚೌವ್ಹಾನ್ ಹಾಗೂ ರೈತರು ಉಪಸ್ಥಿತರಿದ್ದರು.


