ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯಲ್ಲಿ ಕಾಡಾನೆ ದಾಳಿಗೆ ರೈತರೊಬ್ಬರು ಬಲಿಯಾಗಿರುವ ದಾರುಣ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮೃತರನ್ನು ಕಣಗುಪ್ಪೆ ಗ್ರಾಮದ ಧರ್ಮೇಶ್ ಎಂದು ಗುರುತಿಸಲಾಗಿದೆ.
ಬುಧವಾರ ತೋಟದ ಸಮೀಪದಲ್ಲಿದ್ದ ವೇಳೆ ಏಕಾಏಕಿ ಕಾಡಾನೆ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಧರ್ಮೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತರ ಕುಟುಂಬಕ್ಕೆ ಸರ್ಕಾರದ ನಿಯಮಾನುಸಾರ ಪರಿಹಾರ ಹಾಗೂ ಅಗತ್ಯ ನೆರವು ಒದಗಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೇಲೂರು ತಾಲೂಕು ಅರೆಹಳ್ಳಿ ಭಾಗದಲ್ಲಿ ಇದುವರೆಗೆ ಕಾಡಾನೆ ದಾಳಿಗೆ ಅನೇಕ ರೈತರು ಪ್ರಾಣ ಕಳೆದುಕೊಂಡಿದ್ದಾರೆ. ಕಾಡಾನೆಗಳ ನಿರಂತರ ಹಾವಳಿಯಿಂದ ಬೆಳೆ ಹಾನಿಯೊಂದಿಗೆ ಮಾನವ ಜೀವಕ್ಕೂ ಅಪಾಯ ಎದುರಾಗುತ್ತಿದ್ದು, ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ಸರ್ಕಾರ ಹಾಗೂ ಅರಣ್ಯ ಇಲಾಖೆ ವಿಫಲವಾಗಿವೆ ಎಂದು ಆರೋಪಿಸಿದ್ದಾರೆ.
ಘಟನೆಯ ಬಗ್ಗೆ ಸ್ಥಳೀಯರು ತೀವ್ರ ಆಕ್ರೋಷಿತರಾಗಿದ್ದು ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ
ಹಿನ್ನೆಲೆಯಲ್ಲಿ ಸರ್ಕಾರ ಮತ್ತು ಅರಣ್ಯ ಇಲಾಖೆಯ ನಿರ್ಲಕ್ಷ್ಯವನ್ನು ಖಂಡಿಸಿ ತೂಳಲು ಗ್ರಾಮದಲ್ಲಿ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
ಕಾಡಾನೆಗಳ ಹಾವಳಿಯನ್ನು ತಡೆಗಟ್ಟಲು ಶಾಶ್ವತ ಯೋಜನೆ ಜಾರಿಗೊಳಿಸಬೇಕು, ಅರಣ್ಯ ಗಡಿಯ ಗ್ರಾಮಗಳ ಸುರಕ್ಷತೆಗೆ ಆದ್ಯತೆ ನೀಡಬೇಕು ಹಾಗೂ ಮೃತ ರೈತನ ಕುಟುಂಬಕ್ಕೆ ಸೂಕ್ತ ಪರಿಹಾರ, ಕುಟುಂಬದ ಸದಸ್ಯರಿಗೆ ಉದ್ಯೋಗ ಮತ್ತು ಅಗತ್ಯ ಸೌಲಭ್ಯಗಳನ್ನು ತಕ್ಷಣ ಒದಗಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ ಒತ್ತಾಯಿಸಿದ್ದಾರೆ.


