ಲಯನ್ಸ್ ಕ್ಲಬ್ ಬಾಳೆಹೊನ್ನೂರು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ, ಬಾಳೆಹೊನ್ನೂರು ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಜಂತುಹುಳು ನಿರ್ಮೂಲನಾ ದಿನಾಚರಣೆಯನ್ನು ಆಚರಿಸಲಾಯಿತು.
ಈ ಪ್ರಯುಕ್ತ ಬಾಳೆಹೊನ್ನೂರಿನ ಸರ್ಕಾರಿ ಸುವರ್ಣ ಮಾದರಿ ಶಾಲೆಯಲ್ಲಿ ಸುಮಾರು 230 ವಿದ್ಯಾರ್ಥಿಗಳಿಗೆ ಜಂತುಹುಳು ನಿವಾರಣಾ ಮಾತ್ರೆಗಳನ್ನು ವಿತರಿಸಿ, ಸೇವಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಲಯನ್ಸ್ ಕ್ಲಬ್ ಬಾಳೆಹೊನ್ನೂರು ಅಧ್ಯಕ್ಷರಾದ ಶ್ರೀ ಕೆ. ಎಂ. ಯೋಗೇಶ್ ಗೌಡ ಅವರು ಮಾತನಾಡಿ, ಮಕ್ಕಳು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ, ಸ್ವಚ್ಛತೆ ಹಾಗೂ ಶಿಸ್ತಿನ ಜೀವನವನ್ನು ರೂಢಿಸಿಕೊಂಡು, ಉತ್ತಮ ಆರೋಗ್ಯದೊಂದಿಗೆ ಭವಿಷ್ಯದ ಪ್ರಜ್ಞಾವಂತ ನಾಗರಿಕರಾಗಿ ಬೆಳೆದುಬರಬೇಕು ಎಂದು ಹಾರೈಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಕರಾದ ಶ್ರೀಯುತ ಭಗವಾನ್ ಅವರು ಮಾತನಾಡಿ, ಮಕ್ಕಳಲ್ಲಿ ಜಂತುಹುಳು ಸೋಂಕು ಉಂಟಾಗುವ ಕಾರಣಗಳು, ಅದರಿಂದಾಗುವ ಆರೋಗ್ಯ ಸಮಸ್ಯೆಗಳು ಹಾಗೂ ಜಂತುಹುಳು ನಿವಾರಣೆಗೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಾಹಿತಿ ನೀಡಿದರು. ವೈಯಕ್ತಿಕ ಸ್ವಚ್ಛತೆ, ಪರಿಸರ ಸ್ವಚ್ಛತೆ ಹಾಗೂ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವ ಮಹತ್ವವನ್ನು ವಿವರಿಸಿದರು.
ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಸೋಮಶೇಖರ್ ಅವರು ಮಾತನಾಡಿ, ಲಯನ್ಸ್ ಕ್ಲಬ್ ಬಾಳೆಹೊನ್ನೂರು ವತಿಯಿಂದ ಶಾಲೆಯ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಹಮ್ಮಿಕೊಂಡಿರುವ ಈ ಕಾರ್ಯಕ್ರಮವು ಶ್ಲಾಘನೀಯವಾಗಿದ್ದು, ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆಗಳನ್ನು ನೀಡಿರುವುದರಿಂದ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಬಹಳ ಪ್ರಯೋಜನವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಸುಮಾರು 230 ವಿದ್ಯಾರ್ಥಿಗಳಿಗೆ ಜಂತುಹುಳು ನಿವಾರಣಾ ಗುಳಿಗೆಗಳನ್ನು ಸೇವಿಸಲಾಯಿತು. ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ನ ಪದಾಧಿಕಾರಿಗಳು ಹಾಗೂ ಸದಸ್ಯರು, ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಉಪಸ್ಥಿತರಿದ್ದರು.


