ಮೂಡಿಗೆರೆಯಲ್ಲಿ ಆ.15ರಂದು ಪಟ್ಟಣದ ಹೊಯ್ಸಳ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿಯಿಂದ ಏರ್ಪಡಿಸಿದ್ದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಕೆಂಪೇಗೌಡ ಒಕ್ಕಲಿಗರ ವೇದಿಕೆಯ ಸಂಘಟನೆಯನ್ನು ಕಡೆಗಣಿಸಲಾಗಿದೆ ಎಂದು ವೇದಿಕೆ ಅಧ್ಯಕ್ಷ ಬ್ರಿಜೇಶ್ ಕಡಿದಾಳ್ ತಿಳಿಸಿದ್ದಾರೆ.
ಈ ಬಗ್ಗೆ ಹೇಳಿಕೆಯಲ್ಲಿ ತಿಳಿಸಿರುವ ಅವರು, ನಮ್ಮ ಸಂಘಟನೆ ಅಧಿಕೃತವಾಗಿ ರಿಜಿಸ್ಟರ್ ಆಗಿದ್ದು, ನಿರಂತರವಾಗಿ ಜನಪರ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಕಳೆದ ವರ್ಷ ತಾಲೂಕು ಆಡಳಿತದಿಂದ ನಾಡಪ್ರಭು ಕೆಂಪೇಗೌಡ ಅವರ ಜಯಂತಿ ಕಾರ್ಯಕ್ರಮ ನಡೆಸಲು ಸರಕಾರ ಅನುದಾನ ನೀಡದಿದ್ದರೂ, ನಮ್ಮ ಸಂಘಟನೆಯಿಂದ ಹಣ ಖರ್ಚು ಮಾಡಿ ಕಾರ್ಯಕ್ರಮ ನಡೆಸಿದ್ದೆವು. ಅಲ್ಲದೇ ಇತರೇ ಮಹನೀಯರ ಜಯಂತಿ ಕಾರ್ಯಕ್ರಮಗಳಿಗೆ ನಮ್ಮ ವೇದಿಕೆ ಸದಸ್ಯರು ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮದ ಯಶಸ್ವಿಗೆ ಪಾತ್ರರಾಗಿದ್ದೇವೆಂದು ಹೇಳಿದ್ದಾರೆ.
ಆ.15ರಂದು ಹೊಯ್ಸಳ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಸಹಿತ ಅನೇಕ ಸಂಘಟನೆ ಮುಖಂಡರು ಆಗಮಿಸಿದ್ದರು. ಆದರೆ ಬಹುತೇಕ ಸಂಘಟನೆ ಮುಖಂಡರನ್ನು ವೇದಿಕೆ ಮೇಲೆ ಆಹ್ವಾನಿಸಿದ್ದು, ಕೆಂಪೇಗೌಡ ಒಕ್ಕಲಿಗರ ವೇದಿಕೆ ಅಧ್ಯಕ್ಷರನ್ನು ಆಹ್ವಾನಿಸದೇ ಸೌಜನ್ಯಕ್ಕೂ ನಮ್ಮ ವೇದಿಕೆ ಹೆಸರು ಬಳಿಸಿಲ್ಲ. ತಾಲೂಕಿನಲ್ಲಿ ಅನೇಕ ಸಂಘಟನೆಗಳಿದ್ದು, ನಮ್ಮ ವೇದಿಕೆ ಮುಂಚೂಣಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವುದು ತಾಲೂಕು ಆಡಳಿತಕ್ಕೆ ತಿಳಿದಿದೆ. ಆದರೂ ಕೂಡ ನಮ್ಮ ಸಂಘಟನೆಯನ್ನು ಕಡೆಗಣಿಸಿದ್ದು,ಈ ಬಗ್ಗೆ ತಾಲೂಕು ಆಡಳಿತ ಸ್ಪಷ್ಟನೆ ನೀಡಬೇಕು. ಇಲ್ಲವಾದರೆ ಮುಂದಿನ ದಿನದಲ್ಲಿ ತಕ್ಕ ಉತ್ತರ ನೀಡಲು ವೇದಿಕೆ ಸಿದ್ದವಾಗಿದೆ ಎಂದು ಎಚ್ಚರಿಸಿದ್ದಾರೆ.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಬಕ್ಕಿ, ಅಶ್ವಥ್ ಬೆಟ್ಟಗೆರೆ ಮುಂತಾದವರು ಉಪಸ್ಥಿತರಿದ್ದರು.


