ಪಶ್ಚಿಮಘಟ್ಟಗಳಲ್ಲಿ ಪರಿಸರ ಸೂಕ್ಷ್ಮ ಪ್ರದೇಶ ಎಂಬ ಹೆಸರಿನಲ್ಲಿ ಡಾ. ಕಸ್ತೂರಿ ರಂಗನ್ ವರದಿ ಆಧಾರದಲ್ಲಿ ಜಾರಿ ಮಾಡಲು ಹೊರಟಿರುವ ಸಂದರ್ಭದಲ್ಲಿ ಈ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ರೈತರು ಮತ್ತು ಸಾರ್ವಜನಿಕರೊಂದಿಗೆ ಸಂವಾದ ನಡೆಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಲು ಮುತುವರ್ಜಿ ವಹಿಸಿರುವುದು ಸ್ವಾಗತಾರ್ಹವಾಗಿದ್ದ ಸೆಪ್ಟಂಬರ್ 19 ರಂದು ಶನಿವಾರದಂದು ಬಾಳೆಹೊನ್ನೂರಿನಲ್ಲಿ ಚಿಕ್ಕಮಗಳೂರು ಜಿಲ್ಲೆಯ ರೈತರೊಂದಿಗೆ ಸಂವಾದ ನಡೆಸುತ್ತಿದ್ದು, ಈ ಕಾರ್ಯಕ್ರಮಕ್ಕೆ ಜಿಲ್ಲೆಯ ರೈತಾಪಿ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಚಿಕ್ಕಮಗಳೂರು ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಡಿ.ಎಲ್. ಅಶೋಕ್ ಕುಮಾರ್ ಬಾಳೆಗದ್ದೆ ಮನವಿ ಮಾಡಿದ್ದಾರೆ.
ಸೆಪ್ಟೆಂಬರ್ 19ರ ಶನಿವಾರ ಮದ್ಯಾಹ್ನ 3.00 ಗಂಟೆಗೆ ಬಾಳೆಹೊನ್ನೂರಿನ ಕಲಾಭವನ, ಗಣಪತಿ ಪೆಂಡಾಲ್ನಲ್ಲಿ ಮಾನ್ಯ ಮುಖ್ಯಮಂತ್ರಿ ಅವರು ಪಶ್ಚಿಮಘಟ್ಟಗಳಲ್ಲಿ ಪರಿಸರ ಸೂಕ್ಷ್ಮ ಪ್ರದೇಶ ಸಂವಾದ ಕಾರ್ಯಕ್ರಮಕ್ಕೆ ಜಿಲ್ಲೆಯ ಕಸ್ತೂರಿ ರಂಗನ್ ವರದಿಯಲ್ಲಿ ಉಲ್ಲೇಖಿತವಾಗಿರುವ ಪರಿಸರ ಸೂಕ್ಷ್ಮ ಪ್ರದೇಶದ ವ್ಯಾಪ್ತಿಯ ಎಲ್ಲಾ ರೈತ ಬೆಳೆಗಾರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು, ಈ ಮೂಲಕ ರೈತರ ಧ್ವನಿಯನ್ನು ಮುಖ್ಯಮಂತ್ರಿಯವರಿಗೆ ಸಮರ್ಥವಾಗಿ ತಲುಪಿಸುವ ಮೂಲಕ ಈ ಯೋಜನೆಯನ್ನು ಕೈಬಿಡುವಂತೆ ಕೇಂದ್ರದ ಮೇಲೆ ಒತ್ತಡ ಹೇರಲು ಮನವಿ ಮಾಡಬೇಕು.
ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಣೆ ಮಾಡಿದರೆ ಅದು ಮುಂದೆ ಮಲೆನಾಡಿನ ಜನರ ಜೀವನಕ್ಕೆ ಮಾರಕವಾಗಿ ಪರಿಣಮಿಸುತ್ತದೆ. ಸಾಮಾನ್ಯ ಜನಜೀವನಕ್ಕೆ ಹಲವಾರು ಅಡೆತಡೆಗಳು ಉಂಟಾಗಲಿದೆ. ಈಗ ಈ ಭಾಗದ ರೈತರು ಎಚ್ಚೆತ್ತುಕೊಂಡು ಹೋರಾಟ ಮಾಡದೇ ಹೋದರೆ ಭವಿಷ್ಯದಲ್ಲಿ ತೊಂದರೆ ಅನುಭವಿಸಬೇಕಾಗುತ್ತದೆ.
ಈ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ರೈತಾಪಿ ವರ್ಗದವರು ಸೆಪ್ಟಂಬರ್ 19ರಂದು ಬಾಳೆಹೊನ್ನೂರಿಗೆ ತೆರಳಿ ಮುಖ್ಯಮಂತ್ರಿಯವರಿಗೆ ನಮ್ಮ ಅಹವಾಲು ಸಲ್ಲಿಸಬೇಕಾಗಿದೆ. ಆದುದ್ದರಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಅಶೋಕ್ ಕುಮಾರ್ ಮನವಿ ಮಾಡಿದ್ದಾರೆ.


