ಆರೋಗ್ಯಕರ ಜೀವನ ಹಾಗೂ ಭೂಮಿಯ ಮೇಲಿನ ಎಲ್ಲಾ ಜೀವಿಗಳ ಅಸ್ತಿತ್ವ ಉಳಿಸಿಕೊಳ್ಳಲು ಪರಿಸರವನ್ನು ರಕ್ಷಿಸುವ ಜವಾಬ್ದಾರಿ ನಮ್ಮಲ್ಲರ ಮೇಲಿದೆ ಎಂದು ಮೂಡಿಗೆರೆ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ವಿ.ಜಯಪ್ರಕಾಶ್ ಹೇಳಿದರು.
ಅವರು ಸೋಮವಾರ ಮೂಡಿಗೆರೆ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಅರಣ್ಯ ಮತ್ತು ಅಭಿಯೋಜನಾ ಇಲಾಖೆ ವತಿಯಿಂದ ಏರ್ಪಡಿಸಿದ್ದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಾನವ ಸೇರಿದಂತೆ ಪ್ರಾಣಿ, ಪಕ್ಷಿಗಳು, ಜೀವ ಸಂಕುಲಗಳು ಗಾಳಿ, ನೀರು, ಮಣ್ಣಿನ ಮೇಲೆ ಅವಲಂಬಿತವಾಗಿದೆ. ಪರಿಸರ ನಾಶವಾದರೆ ಯಾವ ಜೀವ ಸಂಕುಲಗಳು ಬದುಕಲು ಸಾಧ್ಯವಿಲ್ಲ. ಹಾಗಾಗಿ ಪ್ರತಿಯೊಬ್ಬರೂ ಒಂದೊಂದು ಗಿಡ ನೆಟ್ಟು ಅದನ್ನು ಪೋಷಣೆ ಮಾಡಿ ಬೆಳೆಸುವ ಮೂಲಕ ಪರಿಸರವನ್ನು ರಕ್ಷಿಸಬೇಕು. ಅಲ್ಲದೇ ಪರಿಸರದ ಬಗ್ಗೆ ಜನರಲ್ಲಿ ಹೆಚ್ಚಾಗಿ ಜಾಗೃತಿ ಮೂಡಿಸಬೇಕಿದೆ ಎಂದು ಹೇಳಿದರು.
ಮೂಡಿಗೆರೆ ವಲಯ ಅರಣ್ಯ ಅಧಿಕಾರಿ ಮೋಹನ್ ಕುಮಾರ್ ಮಾತನಾಡಿ ಹಿಂದೆ ಪ್ಲಾಸ್ಟಿಕ್ ಬಳಕೆ ಇರಲಿಲ್ಲ. ಆಗ ಪರಿಸರ ಶುದ್ಧವಾಗಿತ್ತು. ಕಾಲ ಕಳೆದಂತೆ ಪ್ಲಾಸ್ಟಿಕ್ ಬಳಕೆ ಹೆಚ್ಚಾಗಿದ್ದರಿಂದ ಪರಿಸರ ನಾಶಕ್ಕೆ ಕಾರಣವಾಗಿದೆ. ಹಾಗಾಗಿ ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣ ನಿಷೇಧಿಸಬೇಕಾಗಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕೀಲರ ಸಂಘದ ಅಧ್ಯಕ್ಷ ಡಿ.ಸಿದ್ದಯ್ಯ ವಹಿಸಿದ್ದರು. ಪ್ರಧಾನ ಸಿವಿಲ್ ನ್ಯಾಯಾಧೀಶ ಡಿ.ಸಚಿನ್, ವಕೀಲರ ಸಂಘದ ಕಾರ್ಯದರ್ಶಿ ಎಚ್.ಜಿ.ಆದರ್ಶ, ಸಹಾಯಕ ಸರಕಾರಿ ಅಭಿಯೋಜಕಿ ಟಿ.ರೂಪಾ, ವಕೀಲರಾದ ಬಿ.ಟಿ.ನಟರಾಜ್, ನಟೇಶ್, ಚಂದ್ರಶೇಖರ್, ನ್ಯಾಯಾಲಯ ಹಾಗೂ ಅರಣ್ಯ ಸಿಬ್ಬಂದಿ ಉಪಸ್ಥಿತರಿದ್ದರು.
ನಿರಂತರ ಸುದ್ದಿ ಹಾಗೂ ಉಪಯುಕ್ತ ಮಾಹಿತಿಗಳಿಗಾಗಿ ದರ್ಪಣ ನ್ಯೂಸ್ ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಒತ್ತಿ
https://chat.whatsapp.com/IkFCXal7O5ODMBHsmKv9ak


