ಸರ್ಕಾರಿ ಅಧಿಕಾರಿಗಳು ಕಾನೂನು ಚೌಕಟ್ಟಿನಲ್ಲಿಯೇ ಕಾರ್ಯನಿರ್ವಹಿಸಬೇಕು. ನಿಯಮ ಬಿಟ್ಟು ಕೆಲಸ ಮಾಡಿದರೆ ಅಧಿಕಾರಿಗಳು ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಚಿಕ್ಕಮಗಳೂರು ಲೋಕಾಯುಕ್ತ ಡಿವೈಎಸ್ಪಿ ಜೆ.ಜೆ.ತಿರುಮಲೇಶ್ ಹೇಳಿದರು.
ಅವರು ಬುಧವಾರ ಪಟ್ಟಣದ ತಾ.ಪಂ. ಸಭಾಂಗಣದಲ್ಲಿ ಏರ್ಪಡಿಸಿದ್ದ ಕರ್ನಾಟಕ ಲೋಕಾಯುಕ್ತ ಜನಸಂಪರ್ಕ ಸಭೆಯಲ್ಲಿ ಮಾತನಾಡಿದರು. ಜನರು ತಮ್ಮ ಕುಂದು ಕೊರತೆ ಹಾಗೂ ದೂರುಗಳನ್ನು ಜಿಲ್ಲಾ ಕೇಂದ್ರದಲ್ಲಿರುವ ಲೋಕಾಯುಕ್ತ ಕಚೇರಿಗೆ ಆಗಮಿಸಲು ಸಾಧ್ಯವಾಗದ ಹಿನ್ನಲೆಯಲ್ಲಿ ಪ್ರತಿ ತಿಂಗಳಿಗೊಮ್ಮೆ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ ನಡೆಸಲಾಗುತ್ತಿದೆ. ಸಭೆಯಲ್ಲಿ ಎಲ್ಲಾ ಅಧಿಕಾರಿಗಳನ್ನು ಕರೆಸಿ ಸಾರ್ವಜನಿಕರ ಸಣ್ಣಪುಟ್ಟ ದೂರುಗಳನ್ನು ಸ್ಥಳದಲ್ಲಿಯೇ ಇತ್ಯರ್ಥ ಪಡಿಸಲಾಗುವುದು. ಕೆಲ ದೂರುಗಳನ್ನು ದಾಖಲಿಸಿಕೊಂಡು ತನಿಖೆ ನಡೆಸಿ ಕ್ರಮ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ಸಾರ್ವಜನಿಕರು ಮಾಹಿತಿ ಹಕ್ಕು ನೀಡಲು ಸತಾಯಿಸುತ್ತಿರುವ ಅಧಿಕಾರಿಗಳು, ಇ-ಸ್ವತ್ತು ನೀಡದಿರುವುದು, ಅರಣ್ಯ ಹಕ್ಕು ಪತ್ರಕ್ಕೆ ಸತಾಯಿಸುತ್ತಿರುವುದು ಸೇರಿದಂತೆ ವಿವಿಧ ವಿಷಯದ ಬಗ್ಗೆ ದೂರು ನೀಡಿದರು. ಪಟ್ಟಣದ ನಿವಾಸಿ ಗೌತಮ್ ಎಂಬುವರು ಪಟ್ಟಣಕ್ಕೆ 1 ವಾರದಿಂದ ಕಲುಷಿತ ಕುಡಿಯುವ ನೀರು ಸರಬರಾಜು ಆಗುತ್ತಿದೆ ಎಂದು ಬಾಟಲಿಯಲ್ಲಿ ನೀರು ತಂದು ಸಭೆಯ ಗಮನಕ್ಕೆ ತಂದರು.
ದೂರುದಾರರ ಅಹವಾಲು ಆಲಿಸಿದ ಬಳಿಕ ಸಣ್ಣಪುಟ್ಟ ಸಮಸ್ಯೆ ಅಧಿಕಾರಿಗಳ ವ್ಯಾಪ್ತಿಯಲ್ಲಿಯೇ ಬಗೆಹರಿಸಿಕೊಳ್ಳಬೇಕು. ಇದನ್ನು ಲೋಕಾಯಕ್ತವರೆಗೆ ತರಬಾರದು. ಕಲುಷಿತ ನೀರು ಜನರಿಗೆ ಸರಬರಾಜು ಆಗುತ್ತಿರುವುದು ಗಂಭೀರ ವಿಚಾರ. ಇದನ್ನು ಬಗೆಹರಿಸದಿದ್ದರೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಡಿವೈಎಸ್ಪಿ ಜೆ.ಜೆ.ತಿರುಮಲೇಶ್, ಪ.ಪಂ. ಮುಖ್ಯಾಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು.
ಸಭೆಯಲ್ಲಿ ಲೋಕಾಯುಕ್ತ ಇನ್ಸ್ಪೆಕ್ಟರ್ ಬಿ.ಮಲ್ಲಿಕಾರ್ಜುನ್, ಎ.ಸಿ.ರಾಟೋಡ್, ತಹಸೀಲ್ದಾರ್ ತಿಪ್ಪೇಸ್ವಾಮಿ, ತಾ.ಪಂ. ಇಒ ಹರ್ಷಕುಮಾರ್, ಲೋಕಾಯುಕ್ತ ಸಿಬ್ಬಂದಿ ಸಿ.ಲೋಕೇಶ್, ಬಿ.ಆರ್.ವಿಜಯಬಾಸ್ಕರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.




