ಮೂಡಿಗೆರೆ ತಾಲ್ಲೂಕಿನ ಮುದ್ರೆಮನೆ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮತ್ತೋರ್ವರಿಗೆ ಗಂಭೀರ ಪೆಟ್ಟಾಗಿದೆ.
ಸಕಲೇಶಪುರದಿಂದ ಮೂಡಿಗೆರೆಗೆ ಬರುತ್ತಿದ್ದ ಸಾರಿಗೆ ಬಸ್ ಮತ್ತು ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸ್ವಿಫ್ಟ್ ಕಾರಿನ ನಡುವೆ ಅಪಘಾತ ಸಂಭವಿಸಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಬೆಂಗಳೂರು ಮೂಲದ ತಾಯಿ ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಂದೆ ಗಂಭೀರ ಗಾಯಗೊಂಡಿದ್ದು ಮೂಡಿಗೆರೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯಲಾಗುತ್ತಿದೆ.

ಮೃತರನ್ನು ಪೂಜಾ ಹಿರೇಮಠ್ (42 ವರ್ಷ) ಹಾಗೂ ಅವರ ಪುತ್ರ ನಿರಂಜನ (12ವರ್ಷ) ಎಂದು ಗುರುತಿಸಲಾಗಿದೆ. ಕಾರು ಚಲಾಯಿಸುತ್ತಿದ್ದ ಶಿವಯೋಗಯ್ಯ ಹಿರೇಮಠ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾರ್ಕಳದ ಜ್ಞಾನಸುಧ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿರುವ ತಮ್ಮ ಹಿರಿಯ ಮಗನನ್ನು ನೋಡಲು ಹೋಗಿ ಬೆಂಗಳೂರಿಗೆ ಹಿಂದಿರುಗುತ್ತಿದ್ದರು ಎಂದು ತಿಳಿದುಬಂದಿದೆ.
ಶಿವಯೋಗಯ್ಯ ಬೆಂಗಳೂರಿನ ರಿಲಯನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.



