ತಾನು ಪ್ರತಿನಿಧಿಸುವ ಭಾಗದ ಜನರ ಪರವಾಗಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರೊಬ್ಬರು ಮೂಡಿಗೆರೆ ತಾಲ್ಲೂಕು ಕಛೇರಿ ಎದುರು ಏಕಾಂಗಿ ಪ್ರತಿಭಟನೆಗೆ ಮುಂದಾಗಿದ್ದಾರೆ.
ಮೂಡಿಗೆರೆ ತಾಲ್ಲೂಕಿನ ನಿಡುವಾಳೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನವೀನ್ ಹಾವಳಿ ಎಂಬುವವರು ತಾಲ್ಲೂಕು ಕಛೇರಿ ಎದುರು ಪ್ರತಿಭಟನೆ ನಡೆಸುತ್ತಾ ರ್ಕಾರದ ಗಮನ ಸೆಳೆಯುವ ಪ್ರಯತ್ನ ನಡೆಸಿದ್ದಾರೆ.
ಮೂಡಿಗೆರೆ ತಾಲೂಕಿನ ಮರ್ಕಲ್, ನಿಡುವಾಳೆ ಗ್ರಾಮದ 70ಕ್ಕೂ ಅಧಿಕ ಮಂದಿ ನಿವೇಶನ ಹಕ್ಕುಪತ್ರಕ್ಕಾಗಿ 94 ಸಿ ಯಲ್ಲಿ ಅರ್ಜಿ ಸಲ್ಲಿಸಿದ್ದು, 30 ಕ್ಕೂ ಅಧಿಕ ಮಂದಿ ಸರಕಾರಕ್ಕೆ ಹಣ ಪಾವತಿ ಮಾಡಿದ್ದಾರೆ. ಆದರೆ ತಹಶೀಲ್ದಾರ್ ಅವರು ಹಕ್ಕುಪತ್ರ ನೀಡಲು ಹಿಂದೇಟು ಹಾಕುತ್ತಿದ್ದಾರೆ. ತಾಲೂಕು ಕಚೇರಿಗೆ ಬಂದು ವಿಚಾರಿಸಿದರೆ ನಾಳೆ ಬನ್ನಿ ಎಂಬ ಹಾರಿಕೆ ಉತ್ತರ ನೀಡುತ್ತಾರೆ. ಹಾಗಾಗಿ ಏಕಾಂಗಿಯಾಗಿ ಪ್ರತಿಭಟನೆ ಆರಂಭಿಸಿದ್ದೇನೆAದು ನವೀನ್ ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕಿನಲ್ಲಿ ಕೂಲಿ ಕಾರ್ಮಿಕರೇ ಹೆಚ್ಚಾಗಿ ವಾಸ ಮಾಡುತ್ತಿದ್ದಾರೆ. ನಿವೇಶನದ ಹಕ್ಕು ಪತ್ರ ಪಡೆಯಲು 94 ಸಿಯಲ್ಲಿ ಅರ್ಜಿ ಸಲ್ಲಿಸಿ 2 ವರ್ಷ ಕಳೆದರೂ ಹಕ್ಕುಪತ್ರ ನೀಡದೆ ಅಧಿಕಾರಿಗಳು ಮೀನಾಮೇಷ ಎಣಿಸುತ್ತಿದ್ದಾರೆ. ಗ್ರಾಮಸ್ಥರು ಕಚೇರಿಗಳಿಗೆ ಅಲೆದು ಅಲೆದು ರೋಸಿ ಹೋಗಿದ್ದಾರೆ. ಇಂತಹ ಬೇಜವಾಬ್ದಾರಿ ಅಧಿಕಾರಿಗಳಿಂದ ಬಡಜನರ ಸಂಕಷ್ಟ ನಿವಾರಣೆಯಾಗದು. ಹಾಗಾಗಿ ಜನರ ಪರವಾಗಿ ಖುದ್ದಾಗಿ ನಾನೇ ಬಂದು ವಿಚಾರಿಸಿದರೂ ತಾಲೂಕು ಕಚೇರಿಯಲ್ಲಿ ಅಧಿಕಾರಿಗಳು ಕ್ಯಾರೆ ಅನ್ನುತ್ತಿಲ್ಲ. ಜನಪ್ರತಿನಿಧಿಗಳ ಮಾತಿಗೂ ಇಲ್ಲಿ ಬೆಲೆ ಇಲ್ಲ. ಇನ್ನು ಸಾಮಾನ್ಯ ಜನರ ಗತಿಯೇನು? ಸಮಸ್ಯೆ ನಿವಾರಣೆಯಾಗುವವರೆಗೂ ಏಕಾಂಗಿಯಾಗಿ ಮೌನ ಪ್ರತಿಭಟನೆ ಮುಂದುವರೆಸುತ್ತೇನೆಂದು ಹೇಳಿದರು.



